ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಯುವಕನ ಶವ ಪತ್ತೆಯಾಗಿದೆ. ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೃತ ಯುವಕ ಬದ್ರುದ್ದೀನ್ ಡಿಕೆ (27) ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ಸೇಡಿಯಾಪು ರಸ್ತೆಯ ಬದಿಯಲ್ಲಿ ದ್ವಿಚಕ್ರ ವಾಹನ ನಿಲ್ಲಿತ್ತಿದ್ದು, ಸಂಶಯದ ಹಿನ್ನೆಲೆಯಲ್ಲಿ ಸ್ಥಳೀಯರು ಮಾಹಿತಿ ನೀಡಿದ ಬಳಿಕ ಪೊಲೀಸರು ಪರಿಶೀಲನೆ ನಡೆಸಿದರು. ಇಂದು ಹನುಮಾಜೆ ಗುಡ್ಡದ ಬಳಿಯಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆಯಾಯಿತು. ಬದ್ರುದ್ದೀನ್ ಕಳೆದ ಎಂಟು ವರ್ಷಗಳಿಂದ ಚಿಕನ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದರು. ನವೆಂಬರ್ 29ರಂದು ಎಂದಿನಂತೆ ಕೆಲಸಕ್ಕೆ ಬಂದಿದ್ದ ಅವರು, ನಂತರ ಮಾಲಕರಿಗೆ ತಿಳಿಸಿ ಹೊರ ಹೋಗಿದ್ದರು. ಆದರೆ ಮನೆಗೂ ತೆರಳದೇ, ಕೆಲಸಕ್ಕೂ ಹಾಜರಾಗದೇ ನಾಪತ್ತೆಯಾಗಿದ್ದರು. ಘಟನೆಯ ಮೂರು ದಿನಗಳ ಬಳಿಕ ಹನುಮಾಜೆ ಗುಡ್ಡದಲ್ಲಿ ಶವವಾಗಿ ಪತ್ತೆಯಾದ ಪ್ರಕರಣದಲ್ಲಿ ಆತ್ಮಹತ್ಯೆಯ ಹಿಂದಿನ ಕಾರಣ ಇನ್ನೂ ನಿಗೂಢವಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















